ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !
ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಗೆ ಜೈ ಕೂಗುವ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂದು ಪ್ಲೇ ಕಾರ್ಡ್ ಹಿಡಿದು ಬಾಲರಾಜ್ ಅರಸ್ ರಸ್ತೆಯಲ್ಲಿ ಅಳವಡಿಸಿದ್ದ ಪೊಲೀಸ್ ಬ್ಯಾರಿಕೇಟ್ ಅನ್ನು ದಾಟಿ ಮುನ್ನುಗ್ಗಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಗೇಟ್ ಅನ್ನು ಪ್ರವೇಶಿಸಲು ಯತ್ನಿಸಿದರು.
ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರ ವಿರುದ್ಧ ಪ್ರಕರಣ ದಾಖಲಾಗಬೇಕು ಅವರ ವಿರುದ್ಧ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಈ ವೇಳೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಒಂದು ಕಾಲದಲ್ಲಿ ವಂದೇ ಮಾತರಂ ಭಾರತ್ ಮಾತಾ ಕಿ ಜೈ ಅನ್ನುತಿದ್ದ ಕಾಂಗ್ರೆಸ್ ಪಕ್ಷ ಈಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದನ್ನ ಖಂಡಿಸುವ ಪ್ರಯತ್ನ ಮಾಡುತ್ತಿಲ್ಲ, ಟಿವಿ ಗಳಲ್ಲಿ ಘೋಷಣೆ ಕೂಗಿದವನ ಮುಖ ತೋರಿಸುತ್ತಿದ್ದರು. ಆತನ ಬಂಧನ ತಡವಾಗುತ್ತಿರುವುದಕ್ಕೆ? ಆತನನ್ನ ಬಂಧಿಸುತ್ತಿಲ್ಲ ಏಕೆ ?
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರರಿಗೆ ಕಣ್ಣು ಕಾಣಿಸುವುದಿಲ್ಲವೇ? ಕಿವಿ ಕೇಳಿಸುವುದಿಲ್ಲವೆ ? ಎಂದು ಆಕ್ರೋಶ ಹೊರಹಾಕಿದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply